ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ತಾಕೀತು ಮಾಡಿರುವ ಹೈಕೋರ್ಟ್, ಒಂದೊಮ್ಮೆ ಅವರು ಹೇಳಿಕೆ ನೀಡಿ ಅದು ಮಾನಹಾನಿಕಾರಕ ಮತ್ತು ಅಪರಾಧವೆಂದು ತಿಳಿದು ಬಂದರೆ ಪೊಲೀಸರು ಕಾನೂನು ಕ್ರಮ ಜರಗಿಸಬೇಕು ಎಂದು ನಿರ್ದೇಶನ ನೀಡಿದೆ.
ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಸದಸ್ಯರ ವಿರುದ್ಧ ಮಹೇಶ್ ಶೆಟ್ಟಿ ಅವರು ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡಬಾರದು.
ಒಂದೊಮ್ಮೆ ಮಾನಹಾನಿ ಹೇಳಿಕೆ ನೀಡಿರುವುದು ತಿಳಿದು ಬಂದರೆ ಪೊಲೀಸರು ಪರಿಶೀಲನೆ ನಡೆಸಿ ಕಾನೂನಿನ ಅಡಿಯಲ್ಲಿ ಕ್ರಮ ಜರಗಿಸಬಹುದು. ಇನ್ನು ಮಹೇಶ್ ಶೆಟ್ಟಿ ತಿಮರೋಡಿ ಅವರು ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ಬಗ್ಗೆ ತಮಗೇನಾದರೂ ದೂರು ಇದ್ದಲ್ಲಿ, ಆ ಬಗ್ಗೆ ಕಾನೂನಿನ ಅಡಿ ಪರಿಹಾರ ಕ್ರಮ ಕಂಡುಕೊಳ್ಳಬಹುದು ಎಂದು ಸೂಚಿಸಿದೆ.